ಬೆಂಗಳೂರು: ಆರ್ಥಿಕ ಸಂಕಷ್ಟದಲ್ಲಿರುವ ನಾಲ್ಕು ಸಾರಿಗೆ ನಿಗಮಗಳು ಡೀಸೆಲ್ ಬೆಲೆ ಏರಿಕೆ, ನೌಕರರ ವೇತನ ಹೆಚ್ಚಳದಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ನಿಗಮಗಳ ಆರ್ಥಿಕ ಮುಗ್ಗಟ್ಟು ನಿವಾರಿಸಲು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ನಿಗಮಗಳು ಮನವಿ ಮಾಡಿವೆ. ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ.
ಸಾರಿಗೆ ನಿಗಮಗಳಿಗೆ 2026 ರ ಮಾರ್ಚ್ 31ರ ವೇಳೆಗೆ 7130.80 ಕೋಟಿ ರೂ. ಹೊಣೆಗಾರಿಕೆ ಇದೆ. ಇದರಲ್ಲಿ ನೌಕರರ ಭವಿಷ್ಯನಿಧಿ ಬಾಕಿ 2298.20 ಕೋಟಿ ರೂ., ಇಂಧನ ಪಾವತಿ ಬಾಕಿ 822.26 ಕೋಟಿ ರೂ. ಇದೆ. ಈ ಮೊತ್ತ ಮತ್ತಷ್ಟು ಹೆಚ್ಚಾಗಿದ್ದು, ನಿರಂತರ ಡೀಸೆಲ್ ಬೆಲೆ ಹೆಚ್ಚಳದಿಂದ ನಿಗಮಗಳ ಇಂಧನ ವೆಚ್ಚದ ಮೇಲೆ ಪರಿಣಾಮ ಬೀರಿದೆ.
ಇಂಧನ ಬೆಲೆ ಹೆಚ್ಚಾಗಿದ್ದರಿಂದ ಮಾಸಿಕ ಅಂದಾಜು 40 ಕೋಟಿ ರೂ. ಹೆಚ್ಚುವರಿಯಾಗಿ ವೆಚ್ಚವಾಗುತ್ತಿದೆ. ಇದು ಹೀಗೆಯೇ ಮುಂದುವರೆದರೆ ವರ್ಷಕ್ಕೆ 500 ಕೋಟಿ ರೂ. ಹೆಚ್ಚುವರಿ ಹೊರೆಯಾಗುತ್ತದೆ. 2025ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ನಾಲ್ಕು ನಿಗಮಗಳ 1.05 ಲಕ್ಷ ನೌಕರರ ವೇತನ ಶೇಕಡ 12.50ರಷ್ಟು ಹೆಚ್ಚಳ ಮಾಡಿದ್ದು, ಇದರಿಂದ ಮಾಸಿಕ 72.80 ಕೋಟಿ ರೂ., ವಾರ್ಷಿಕ 873.64 ಕೋಟಿ ರೂ. ವೆಚ್ಚವಾಗುತ್ತದೆ.
ಪ್ರಯಾಣ ದರ ಹೆಚ್ಚಳ ಕುರಿತಾಗಿ ಇದುವರೆಗೆ ಸರ್ಕಾರಕ್ಕೆ ನಿಗಮಗಳಿಂದ ಯಾವುದೇ ಅಧಿಕೃತ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಸಿಎಂ ಡಿ.ಕೆ. ಶಿವಕುಮಾರ್ ಅವರ ಮೊದಲ ಸಭೆಯಲ್ಲಿ ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಪ್ರಯಾಣ ದರ ಹೆಚ್ಚಳದ ಅನಿವಾರ್ಯತೆ ಬಗ್ಗೆ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ. ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ಹೆಚ್ಚುತ್ತಿರುವ ವೆಚ್ಚದ ಕುರಿತು ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ. ಪ್ರಯಾಣದ ಹೆಚ್ಚಳಕ್ಕೆ ಅನುಮತಿ ಕೋರಲಿದ್ದಾರೆ. ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದಲ್ಲಿ ಶೇ. 12 ರಿಂದ 18ರಷ್ಟು ಪ್ರಯಾಣ ದರ ಹೆಚ್ಚಳವಾಗುವ ಸಾಧ್ಯತೆ ಇದೆ.