ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಸಹಕಾರ ಸಂಸ್ಥೆಗಳಾದ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ (KMF) ಅಧ್ಯಕ್ಷ ಸ್ಥಾನಗಳ ನೇಮಕ ಪ್ರಕ್ರಿಯೆ ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲ ಮೂಡಿಸಿದೆ. ಪಕ್ಷದ ಆಂತರಿಕ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ರಾಜಕೀಯ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಈ ಎರಡೂ ಹುದ್ದೆಗಳಿಗೆ ಡಿ.ಕೆ. ಶಿವಕುಮಾರ್ ಅವರ ಆಪ್ತರು ಅಥವಾ ಕುಟುಂಬದ ಸದಸ್ಯರು ನೇಮಕವಾಗಲಿದ್ದಾರೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿದ್ದವು. ನಿರ್ದಿಷ್ಟವಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್. ರವಿ ಅವರ ಹೆಸರುಗಳು ಪ್ರಬಲವಾಗಿ ಕೇಳಿಬಂದಿದ್ದವು. ಆದರೆ, ಪಕ್ಷದಲ್ಲಿನ ಆಂತರಿಕ ಸಮತೋಲನ ಮತ್ತು ಮುಂಬರುವ ದಿನಗಳನ್ನು ಗಮನದಲ್ಲಿಟ್ಟುಕೊಂಡು, ಸದ್ಯಕ್ಕೆ ಕುಟುಂಬದ ಸದಸ್ಯರನ್ನು ಈ ಹುದ್ದೆಗಳಿಂದ ದೂರವಿಡಲು ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಮಾಜಿ ಸಿ.ಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡುವೆ ನಡೆದ ಸುದೀರ್ಘ ಚರ್ಚೆಯ ನಂತರ, ಈ ಎರಡೂ ಹುದ್ದೆಗಳನ್ನು ಸಿದ್ದರಾಮಯ್ಯ ಅವರ ಬಣದ ನಾಯಕರಿಗೆ ಬಿಟ್ಟುಕೊಡಲು ಒಮ್ಮತ ಮೂಡಿದೆ. ಈ ಮೂಲಕ ಪಕ್ಷದ ಹೈಕಮಾಂಡ್ನ ಸೂಚನೆಯಂತೆ ರಾಜ್ಯ ಕಾಂಗ್ರೆಸ್ನಲ್ಲಿ ಹೊಂದಾಣಿಕೆಯ ರಾಜಕಾರಣಕ್ಕೆ ಒತ್ತು ನೀಡಲಾಗಿದೆ.
ಸಂಭವನೀಯ ನೇಮಕಾತಿಗಳು:
ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಅಫೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಒಲಿಯುವ ಸಾಧ್ಯತೆ ಇದೆ.
ಕೆಎಂಎಫ್ (KMF) ಅಧ್ಯಕ್ಷ ಸ್ಥಾನವನ್ನು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಬೆಳವಣಿಗೆಯನ್ನು ಗಮನಿಸಿದರೆ, ಡಿ.ಕೆ. ಶಿವಕುಮಾರ್ ಅವರು ತಂತ್ರಗಾರಿಕಾ ರಾಜಕಾರಣಕ್ಕೆ ಒತ್ತು ನೀಡುತ್ತಿರುವುದು ಸ್ಪಷ್ಟವಾಗಿದೆ. ಹಿರಿಯ ಕಾಂಗ್ರೆಸ್ ಶಾಸಕರೊಬ್ಬರ ಪ್ರಕಾರ, “ಡಿ.ಕೆ. ಶಿವಕುಮಾರ್ ಅವರು ಪಕ್ಷದ ಸಂಘಟನೆ ಮತ್ತು ಭವಿಷ್ಯದ ದೊಡ್ಡ ಜವಾಬ್ದಾರಿಗಳ ದೃಷ್ಟಿಯಿಂದ ಈ ಸಣ್ಣ ಹುದ್ದೆಗಳನ್ನು ತ್ಯಾಗ ಮಾಡಿದ್ದಾರೆ. ಇದು ಅವರ ರಾಜಕೀಯ ಪ್ರಬುದ್ಧತೆಯನ್ನು ತೋರಿಸುತ್ತದೆ.”
ರಾಜಕೀಯ ಕಾರಣಗಳಿಂದಾಗಿ ಹಲವು ದಿನಗಳಿಂದ ಮುಂದೂಡಲಾಗಿದ್ದ ಈ ಎರಡೂ ಸಂಸ್ಥೆಗಳ ಅಧ್ಯಕ್ಷೀಯ ಚುನಾವಣೆಗಳು, ಮುಂದಿನ ಒಂದು ವಾರದೊಳಗೆ ಅಧಿಕೃತವಾಗಿ ನಡೆಯುವ ನಿರೀಕ್ಷೆಯಿದೆ. ಈ ನೇಮಕಾತಿಗಳ ಮೂಲಕ ಕಾಂಗ್ರೆಸ್ ಸರ್ಕಾರವು ಸಹಕಾರ ಕ್ಷೇತ್ರಗಳಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಮುಂದಾಗಿದೆ.