ಬೆಂಗಳೂರು: ಕನ್ನಡ ಚಲನಚಿತ್ರ ರಂಗ ಉಳಿವಿಗಾಗಿ ಸಮಗ್ರ ಹೊಸ ಚಲನಚಿತ್ರ ನೀತಿ, ಸರ್ಕಾರದಿಂದ ಓಟಿಟಿ ವೇದಿಕೆ, ಏಕಪರದೆ ಚಿತ್ರಮಂದಿರಗಳ ನವೀಕರಣ ಸೇರಿ ವಿವಿಧ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಮನವಿ ಸಲ್ಲಿಸಲಾಗಿದೆ.
ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಡಾ. ಜಯಮಾಲಾ ನೇತೃತ್ವದಲ್ಲಿ ನಿಯೋಗ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿಯಾಗಿ ವಿವಿಧ ಬೇಡಿಕೆ ಒಳಗೊಂಡ ಮನವಿ ಸಲ್ಲಿಸಿದ್ದು, ಮನವಿ ಸ್ವೀಕರಿಸಿದ ಸಿಎಂ ಡಿ.ಕೆ. ಶಿವಕುಮಾರ್ ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎನ್ನುವುದನ್ನು ಆಲೋಚಿಸಲಾಗುವುದು. ಹೊಸ ಚಲನಚಿತ್ರ ನೀತಿ ತರಲು ಚರ್ಚೆ, ಸಹಾಯಧನ ಹೆಚ್ಚಳ, ಚಿತ್ರನಗರಿ ನಿರ್ಮಾಣ ನಿರ್ಮಾಣಕ್ಕೆ ಘೋಷಣೆ ಮಾಡಿದ ಅನುದಾನ ಬಿಡುಗಡೆ ಬಗ್ಗೆ ಹಣಕಾಸು ಇಲಾಖೆ ಎಸಿಎಸ್ ಗೆ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.
ಸರ್ಕಾರದಿಂದಲೇ ಓಟಿಟಿ ವೇದಿಕೆ ಪ್ರಾರಂಭಿಸಬೇಕು. ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ ಮೂಲಕ ಚಿತ್ರಮಂದಿರಗಳ ಲೈಸೆನ್ಸ್ ನವೀಕರಣಕ್ಕೆ ಏಕಗವಾಕ್ಷಿ ಯೋಜನೆ ತರಬೇಕು. ಹೊಸ ಚಿತ್ರಮಂದಿರ ನಿರ್ಮಾಣಕ್ಕೆ ವಿಶೇಷ ಪ್ರೋತ್ಸಾಹ ತೆರಿಗೆ ಮೂಲ ಸೌಕರ್ಯ ವ್ಯವಸ್ಥೆ ಮಾಡಬೇಕು. ಹಳೆಯ ಏಕಪರದೆ ಚಿತ್ರಮಂದಿರಗಳ ನವೀಕರಣ, ಆಧುನಿಕರಣಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲದ ವ್ಯವಸ್ಥೆ ಮಾಡಬೇಕು ಎಂದು ಮನವಿ ಸಲ್ಲಿಸಲಾಗಿದೆ.
ನಿಯೋಗದೊಂದಿಗೆ ಕನ್ನಡ ಚಿತ್ರರಂಗದ ವಿವಿಧ ವಿಷಯಗಳ ಕುರಿತು ಚರ್ಚಿಸಿದ ಸಿಎಂ, ನಾಡಿನ ಕಲೆ ಮತ್ತು ಚಲನಚಿತ್ರ ರಂಗದ ಬೆಳವಣಿಗೆಗೆ ನಮ್ಮ ಸರ್ಕಾರ ಸದಾ ಪೂರಕವಾಗಿ ಸ್ಪಂದಿಸಲಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಂಡಳಿಯ ಮಾಜಿ ಅಧ್ಯಕ್ಷರಾದ ಗಂಗರಾಜು, ಸಾ. ರಾ. ಗೋವಿಂದ್, ಗೌರವ ಕಾರ್ಯದರ್ಶಿ ರಮೇಶ್ ಬಾಬು, ಹಿರಿಯ ನಟ ಸುಂದರ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.