ಬೆಂಗಳೂರು: ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯಲ್ಲಿ ಬೃಹತ್ ಬಂಡೆ ಕುಸುದು ಬಿದ್ದು 7 ಕಾರ್ಮ್ಕರು ಮೃತಪಟ್ಟಿದ್ದಾರೆ. ದುರಂತದ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರ ದು:ಖ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕ್ರಷರ್ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟಿರುವುದು ತೀವ್ರ ದುಃಖವನ್ನುಂಟು ಮಾಡಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ, ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಇನ್ನು ಕಲ್ಲು ಕ್ವಾರಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಜೀವ ರಕ್ಷಣೆ ಹಾಗೂ ಭದ್ರತೆ ಒದಗಿಸುವುದು ಕ್ವಾರಿ ಮಾಲೀಕರ ಕರ್ತವ್ಯವಾಗಿದೆ. ನಿಯಮ ಉಲ್ಲಂಘಿಸುವ ಕ್ವಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕ್ವಾರಿ ದುರಂತ; ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ:
ಇದೇ ವೇಳೆ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಮಾಗಡಿ ರಸ್ತೆ ಬಳಿ ಎರಡು ಕ್ವಾರಿಯಲ್ಲಿ ಕುಸಿತವಾಗಿದ್ದು 7 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಅಧಿಕೃತ ಮಾಹಿತಿ ಪಡೆದ ನಂತರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.
ಪೊಲೀಸ್ ಅಧಿಕಾರಿಗಳು, ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದುರಂತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಫೋಟದಿಂದಾಗಿ ಇದು ಸಂಭವಿಸಿಲ್ಲ ಎಂಬ ಮಾಹಿತಿ ಬಂದಿದ್ದು, ಈ ಕ್ವಾರಿ ಕಾನೂನುಬದ್ಧವಾಗಿ ನಡೆಸಲಾಗುತ್ತಿದೆಯೇ ಇಲ್ಲವೇ ಎಂಬ ವರದಿಯನ್ನು ಪಡೆದು ನಂತರ ಕ್ರಮ ಕೈಗೊಳ್ಳಲಾಗುವುದು. ಕ್ವಾರಿ ನಡೆಸುವಾಗ ಅದರದೇ ಆದ ನಿಯಮಗಳಿದ್ದು, ಅವುಗಳ ಪಾಲನೆಯಾಗುತ್ತಿವೆಯೇ ಇಲ್ಲವೇ ಎಂಬ ಪರಿಶೀಲನೆ ಮಾಡಲಾಗುವುದು ಎಂದರು.
ಕಲ್ಲು ಕ್ವಾರಿ ದುರಂತದ ಬಗ್ಗೆ ಶಾಸಕರು ನಮಗೆ ಮಾಹಿತಿ ನೀಡಿದ್ದು, ಅಧಿಕೃತ ವರದಿ ತರಿಸಿಕೊಂಡು ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ಪರಿಹಾರದ ವಿಚಾರವಾಗಿ ಮೊದಲು ಎಷ್ಟು ಜನ ಸತ್ತಿದ್ದಾರೆ ಎಂಬ ಮಾಹಿತಿಗಳು ಬರಲಿ, ಆನಂತರ ಪರಿಹಾರದ ಬಗ್ಗೆ ತೀರ್ಮಾನ ಮಾಡೋಣ. ತರಾತುರಿಯಲ್ಲಿ ಪರಿಹಾರ ಘೋಷಿಸಿದ ಮಾತ್ರಕ್ಕೆ ಸತ್ತವರು ಮರಳಿ ಬರುವುದಿಲ್ಲ. ಇದಕ್ಕೆಲ್ಲಾ ಅದರದೇ ಆದ ಪ್ರಕ್ರಿಯೆಗಳಿವೆ. ಖಂಡಿತವಾಗಿ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸುವುದು ಬಹಳ ಮುಖ್ಯ ಎಂದು ತಿಳಿಸಿದರು.