ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇಂದು ಐದು ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.
ಸಿಎಂ ಡಿ.ಕೆ.ಶಿವಕುಮಾರ್ ಅವರು ಜಾರಿಗೆ ತಂದಿರುವ ಪ್ರಜಾ ಸೇವಾ ಇಲಾಖೆಯಪ್ರಧಾನ ಕಾರ್ಯದರ್ಶಿಯಾಗಿ ಹರ್ಷ ಗುಪ್ತ ಅವರನ್ನು ನೇಮಕ ಮಾಡಲಾಗಿದೆ. ಜೊತೆಗೆ ಅವರು ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿಯ ಅಧ್ಯಕ್ಷ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ನೀಡಲಾಗಿದೆ.
ಹುದ್ದೆ ನಿರೀಕ್ಷೆಯಲ್ಲಿದ್ದ ಆರ್. ರಾಗಪ್ರಿಯ ಅವರನ್ನು ಕಾರ್ಮಿಕ ಇಲಾಖೆಯ ಆಯಕ್ತರನ್ನಾಗಿ ನೇಮಿಸಲಾಗಿದೆ. ಕಾರ್ಮಿಕ ಇಲಾಖೆಯ ಆಯುಕ್ತರಾಗಿದ್ದ ಡಾ. ಗೋಪಾಲ ಕೃಷ್ಣ ಅವರನ್ನು ಕಾಲೇಜು ಶಿಕ್ಷಣ ಇಲಾಖೆಗೆ ವರ್ಗಾಯಿಸಲಾಗಿದೆ. ಇನ್ನು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಾಗಿದ್ದ ಎನ್. ಮಂಜುಶ್ರೀ ಅವರಿಗೆ ಅವರಿಗೆ ಯಾವುದೇ ಹುದ್ದೆ ನೀಡಿಲ್ಲ.
ರಾಜ್ಯ ಸರ್ಕಾರದಲ್ಲಿ ಆಡಳಿತಾತ್ಮಕ ದಕ್ಷತೆಯನ್ನು ಹೆಚ್ಚಿಸಲು ಮತ್ತು ಸಾರ್ವಜನಿಕರ ಅಹವಾಲುಗಳನ್ನು ಒಂದೇ ಸೂರಿನಡಿ ತ್ವರಿತವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಮಹತ್ತರ ಹೆಜ್ಜೆಯಿಟ್ಟಿದೆ. ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಘೋಷಿಸಿದ್ದ ಮಹತ್ವಾಕಾಂಕ್ಷೆಯ ‘ಪ್ರಜಾಸೇವಾ ಇಲಾಖೆ’ಯನ್ನು ಹೊಸದಾಗಿ ಸ್ಥಾಪಿಸಿ ಈಗ ಅಧಿಕೃತ ಆದೇಶ ಹೊರಡಿಸಲಾಗಿದೆ. ಜೂನ್ 20 ರಂದು ನಡೆದ ಸಚಿವ ಸಂಪುಟ ಸಭೆಯ ತೀರ್ಮಾನದಂತೆ , ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (DPAR) ಜೂನ್ 24 ರಂದು ಈ ಹೊಸ ಇಲಾಖೆಯನ್ನು ಸೃಜಿಸಿ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿ ಮತ್ತು ಆಡಳಿತಾತ್ಮಕ ದಕ್ಷತೆ ಹೆಚ್ಚಿಸಲು ‘ಪ್ರಜಾಸೇವಾ ಇಲಾಖೆ’ಯನ್ನು ಹೊಸದಾಗಿ ಸ್ಥಾಪಿಸಿದೆ. ಆಡಳಿತ ಸುಧಾರಣೆ, ಸಾರ್ವಜನಿಕ ಕುಂದುಕೊರತೆ ವಿಭಾಗ ಮತ್ತು ಸಕಾಲ ಮಿಷನ್ ಅನ್ನು ವಿಲೀನಗೊಳಿಸಲಾಗಿದೆ.
ಹೊಸ ಇಲಾಖೆಯ ಆಡಳಿತ ವಿನ್ಯಾಸದ ಕುರಿತು ಸ್ಪಷ್ಟ ಆದೇಶ ಹೊರಡಿಸಲಾಗಿದ್ದು , ಒಟ್ಟು 73 ಮಂಜೂರಾದ ಖಾಯಂ ಹುದ್ದೆಗಳನ್ನು ಮರುಹೊಂದಾಣಿಕೆ ಮೂಲಕ ಸೃಷ್ಟಿಸಲಾಗಿದೆ. ಇದರಲ್ಲಿ ಸರ್ಕಾರದ ಕಾರ್ಯದರ್ಶಿ ಹಾಗೂ ಮಿಷನ್ ನಿರ್ದೇಶಕರು, ಅಪರ ಮಿಷನ್ ನಿರ್ದೇಶಕರು, ಉಪ ಕಾರ್ಯದರ್ಶಿ ಹಾಗೂ ಆಡಳಿತಾಧಿಕಾರಿ ಹುದ್ದೆಗಳು ಸೇರಿವೆ. ಇದರೊಂದಿಗೆ ತಾಂತ್ರಿಕ ಹಾಗೂ ಆಡಳಿತಾತ್ಮಕ ಕೆಲಸಗಳ ನಿರ್ವಹಣೆಗಾಗಿ ಒಟ್ಟು 48 ಹುದ್ದೆಗಳನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಲಾಗಿದೆ.