ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕರ ಉಚ್ಚಾಟನೆ ಪರ್ವ ಮುಂದುವರೆದಿದೆ. ಎರಡು ದಿನಗಳ ಹಿಂದಷ್ಟೇ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿತ್ತು. ಇದರ ಬೆನ್ನಲ್ಲೇ ಇಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಆರು ವರ್ಷಗಳ ಕಾಲ ಅಮಾನತು ಮಾಡಲಾಗಿದೆ.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಬಮೂಲ್ ನಿರ್ದೇಶಕರಾಗಿರುವ ಆಗಿರುವ ಸತೀಶ್ ಕಡತನಮಲೆ ಅವರನ್ನು ಉಚ್ಛಾಟಿಸಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಈ ಕ್ರಮಕೈಗೊಳ್ಳಲಾಗಿದೆ. ಸತೀಶ್ ಅವರ ನಡವಳಿಕೆ ಕುರಿತು ಸ್ಥಳೀಯ ಮುಖಂಡರು ರಾಜ್ಯ ಶಿಸ್ತು ಸಮಿತಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷವು ಅವರಿಗೆ ನೋಟಿಸ್ ನೀಡಿ ಸ್ಪಷ್ಟೀಕರಣ ಕೇಳಿತ್ತು. ಆದರೆ ಸತೀಶ್ ಕಡತನಮಲೆ ಅವರು ನೀಡಿದ ಸ್ಪಷ್ಟೀಕರಣವು ಸಮಂಜಸ ಹಾಗೂ ತೃಪ್ತಿಕರವಾಗಿಲ್ಲದ ಕಾರಣ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಆದೇಶದಲ್ಲಿ ತಿಳಿಸಿದೆ.
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿದಂತೆ ಸ್ಥಳೀಯ ಪ್ರಮುಖ ಬಿಜೆಪಿ ನಾಯಕರ ವಿರುದ್ಧ ಸತೀಶ್ ಕಡತನಮಲೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಪದೇಪದೇ ಸುದ್ದಿಗೋಷ್ಠಿಗಳನ್ನು ನಡೆಸುವ ಮೂಲಕ ಮಾಧ್ಯಮಗಳ ಮುಂದೆ ಪಕ್ಷ ಮತ್ತು ನಾಯಕರ ವಿರುದ್ಧ ಹೇಳಿಕೆ ನೀಡಿ ಮುಜುಗರ ಉಂಟುಮಾಡಿದ್ದರು. ಸತೀಶ್ ಕಡತನಮಲೆ ಅವರು ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರಿಗೆ ಅತ್ಯಂತ ಆಪ್ತರಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ನ ಪ್ರಭಾವಿ ನಾಯಕ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರೊಂದಿಗೂ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಇದು ಸ್ಥಳೀಯ ಬಿಜೆಪಿ ನಾಯಕರ ಕೆಣ್ಣಿಗೆ ಗುರಿಯಾಗಿತ್ತು. ಈ ನಿಟ್ಟಿನಲ್ಲಿ ಅಸಮಾಧಾನ ವ್ಯಕ್ತಪಡಿಸಿ ದೂರು ನೀಡಿದ್ದರು.