ಬೆಂಗಳೂರು: ವೈದ್ಯರೊಬ್ಬರ ಬಳಿ ಲಂಚ ಪಡೆಯುತ್ತಿದ್ದ ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಡಾ. ಭುಜಬಲಿ ಡಿ. ಯಲಗುದ್ರಿ ಬಂಧಿತ ಆರೋಪಿ. ಗುರುವಾರ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಡಾ. ಭುಜಬಲಿ ಅವರನ್ನು ಬಂಧಿಸಲಾಗಿದೆ. ಅವರು 15000 ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮುಫಾಸಿರ್ ಅಹ್ಮದ್ ಮುಜಾಮಿಲ್ ಎಂಬುವರು ಕೆಪಿಎಂಇ ಪರವಾನಿಗೆ ಪಡೆಯಲು ಅರ್ಜಿ ಸಲ್ಲಿಸಿದ್ದು, ಇದನ್ನು ಅನುಮೋದಿಸಿ ಸಹಿ ಹಾಕಲು ಡಾ. ಭುಜಬಲಿ 30 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದಲ್ಲಿ ದಾಳಿ ನಡೆಸಿ, ಭುಜಬಲಿ ಅವರನ್ನು ವಶಕ್ಕೆ ಪಡೆದು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.