ಉಡುಪಿ: ಅಪ್ರಾಪ್ತ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೊಬ್ಬ ಬಾಲಾಪರಾಧಿಯನ್ನು ವಶಕ್ಕೆ ಪಡೆದು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ. ವಿಖ್ಯಾತ್ ಆಚಾರ್ಯ (19) ಹಾಗೂ ಸುಚಿತ್ ನಾಯಕ್ (20) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೆ, ಓರ್ವ ಬಾಲಾಪರಾಧಿಯನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಆರೋಪಿಗಳು 9ನೇ ತರಗತಿ ವಿದ್ಯಾರ್ಥಿಯನ್ನು ಕೇರಳಕ್ಕೆ ಕರೆದೊಯ್ದು, ವುಡ್ ಕಂಪನಿಯೊಂದರಲ್ಲಿ ಬಲವಂತವಾಗಿ ಕೆಲಸ ಮಾಡಿಸಿದ್ದರೆಂದು ಆರೋಪಿಸಲಾಗಿದೆ.
ಬಾಲಕನನ್ನು ಮನೆಗೆ ಹೋಗಲು ಅವಕಾಶ ನೀಡದೆ ವೈರ್ನಿಂದ ಹಲ್ಲೆ ನಡೆಸಿ, ಚೂರಿ ತೋರಿಸಿ ಕೊಲೆ ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿದೆ. ಪ್ರಕರಣ ಸಂಬಂಧ ಬ್ರಹ್ಮಾವರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.