ಮಂಗಳೂರು: ಹಿಂದೂ ಯುವತಿಯೊಬ್ಬಳಿಗೆ ಅನ್ಯಕೋಮಿನ ಯುವಕರು ಚಾಕು ತೋರಿಸಿ ಕಿರುಕುಳ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುರುಷರಕಟ್ಟೆ ಬಳಿನಡೆದಿದೆ.
ಈ ಸಂಬಂಧ ಪುತ್ತೂರು ಪೊಲೀಸರು ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿವೆ.
ಪುರುಷರಕಟ್ಟೆ ಬಸ್ಸು ನಿಲ್ದಾಣದ ಬಳಿ ಘಟನೆ ನಡೆದಿದೆ ಎಂದು ಯುವತಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪುರುಷರಕಟ್ಟೆ ಬಳಿ ಸ್ಕೂಟಿ ನಿಲ್ಲಿಸಿ ಬಸ್ ಹತ್ತಲು ತೆರಳುತ್ತಿದ್ದಾಗ ತನಗೆ ಮುಂಚೆಯೇ ಪರಿಚಯವಿದ್ದ ಸುಹೈಲ್ ಹಾಗೂ ಆತನ ಜೊತೆಯಲ್ಲಿದ್ದ ಇನ್ನು ಮೂವರು ಯುವಕರು ತನಗೆ ಅಡ್ಡಗಟ್ಟಿ, ಚಾಕು ತೋರಿಸಿ ಕಿರುಕುಳ ನೀಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.
ಯುವತಿಯ ದೂರಿನನ್ವಯ ಪುತ್ತೂರು ಮಹಿಳಾ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 78(1) (ಮಹಿಳೆಯ ಘನತೆಗೆ ಧಕ್ಕೆ/ಕಿರುಕುಳ) ಹಾಗೂ ಸೆಕ್ಷನ್ 3(5) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಪುತ್ತೂರು ಪೊಲೀಸರು ತಕ್ಷಣವೇ ಪ್ರಾಥಮಿಕ ತನಿಖೆ ನಡೆಸಿ, ದೂರಿನಲ್ಲಿದ್ದ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪ್ರಕರಣಕ್ಕೆ ಬೇರೆಯದೇ ಆದ ಆಯಾಮ ಸಿಕ್ಕಿದೆ. ಯುವಕರ ಹೇಳಿಕೆಯ ಪ್ರಕಾರ, ತಾವು ಯಾವುದೇ ಅಪರಾಧಿಕ ಕೃತ್ಯ ಎಸಗಿಲ್ಲ. ತಾವು ಸ್ಥಳೀಯ ಬೇಕರಿಯೊಂದರಲ್ಲಿ ಬ್ರೆಡ್ ಖರೀದಿಸಿ, ಅದಕ್ಕೆ ಚೀಸ್ ಹಾಕಲು ಬೇಕರಿ ಮಾಲೀಕರಿಂದ ಚಾಕು ಪಡೆದುಕೊಂಡಿದ್ದೆವು. ಚೀಸ್ ಕಟ್ ಮಾಡಿದ ನಂತರ ಆ ಚಾಕುವನ್ನು ವಾಪಸ್ ಬೇಕರಿಗೆ ನೀಡಲು ಹೋಗುತ್ತಿದ್ದಾಗ ಅಲ್ಲಿ ಯುವತಿ ಎದುರಾಗಿದ್ದಾಳೆ. ಆದರೆ, ಸ್ಥಳೀಯ ಹಿಂದೂ ಸಂಘಟನೆಯ ಮುಖಂಡ ಮುರಳಿ ಕೃಷ್ಣ ಹಂಸತಡ್ಕ ಹಾಗೂ ಇತರರು ಹಳೆಯ ದ್ವೇಷದ ಹಿನ್ನೆಲೆಯಲ್ಲಿ, ದುರುದ್ದೇಶಪೂರ್ವಕವಾಗಿ ಯುವತಿಯನ್ನು ಮುಂದೆ ಬಿಟ್ಟು ನಮ್ಮ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಯುವಕರು ಪ್ರತಿಯಾಗಿ ದೂರು ನೀಡಿದ್ದಾರೆ.
ಯುವಕರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲೂ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಸದ್ಯ ಪುರುಷರಕಟ್ಟೆ ಜಂಕ್ಷನ್ ಮತ್ತು ಬೇಕರಿ ಆಸುಪಾಸಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.