ನವದೆಹಲಿ: ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ನಿಟ್ಟಿನಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಬೀಡು ಬಿಟ್ಟಿದ್ದು, ಹೈಕಮಾಂಡ್ ನಾಯಕರೊಮ್ದಿಗೆ ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನಿವಾಸದಲ್ಲಿ ಗುರುವಾರ ಸಭೆ ನಡೆಸಿದ್ದು, ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ಹಂತದ ಚರ್ಚೆ ನಡೆಸಿದಾರೆ.
ಸಭೆ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ರಾಹುಲ್ ಗಾಂಧಿ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಮೊದಲಿಗೆ ಸಿದ್ದರಾಮಯ್ಯ, ಬಳಿಕ ಡಿ.ಕೆ. ಶಿವಕುಮಾರ್ ಹಾಗೂ ಅಂತಿಮವಾಗಿ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಸಭೆ ನಡೆಸಿ ಸಚಿವ ಸಂಪುಟ ವಿಸ್ತರಣೆ ಕುರಿತು ಸಮಾಲೋಚನೆ ನಡೆಸಿದ್ದು, ತಮ್ಮದೇ ಆದ ಪಟ್ಟಿ ಸಿದ್ಧಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರತ್ಯೇಕ ಸಚಿವರ ಪಟ್ಟಿಯನ್ನು ರಾಹುಲ್ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ಧಪಡಿಸಿದ್ದ ಮತ್ತೊಂದು ಪಟ್ಟಿಯನ್ನೂ ಪರಿಶೀಲಿಸಿ, ವಿವಿಧ ಅಂಶಗಳನ್ನು ಪರಿಗಣಿಸಿ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗಿದೆ ಎನ್ನಲಾಗಿದೆ. ಇದೇ ಸಭೆಯಲ್ಲಿ ಖಾಲಿ ಇರುವ ವಿಧಾನಸಭೆ ಸ್ಪೀಕರ್ ಹುದ್ದೆ ಭರ್ತಿ ಕುರಿತೂ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.
ದೆಹಲಿಯಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೂ ರಾಜ್ಯ ನಾಯಕರು ಸಭೆ ನಡೆಸುವ ಸಾಧ್ಯತೆ ಇತ್ತು. ಆದರೆ, ಅವರು ತುರ್ತಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಕಾರಣ ಆ ಸಭೆ ನಡೆಯಲಿಲ್ಲ. ಇದೀಗ ರಾಹುಲ್ ಗಾಂಧಿ ಪರಿಶೀಲಿಸಿರುವ ಪಟ್ಟಿಯನ್ನು ಖರ್ಗೆ ಅವರೊಂದಿಗೆ ಚರ್ಚಿಸಿದ ಬಳಿಕ ಸಚಿವ ಸಂಪುಟ ವಿಸ್ತರಣೆಯ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸಹ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ನಡೆದಿರುವುದನ್ನು ದೃಢಪಡಿಸಿದ್ದು, ಅಂತಿಮ ನಿರ್ಧಾರವನ್ನು ಪಕ್ಷದ ವರಿಷ್ಠರು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಸಂಪುಟ ವಿಸ್ತರಣೆಯಲ್ಲಿ ಯುವ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದೆ. ಪ್ರಸ್ತುತ ಸಚಿವ ಸಂಪುಟದಲ್ಲಿ ಮಹಿಳಾ ಸದಸ್ಯರಿಲ್ಲದ ಹಿನ್ನೆಲೆಯಲ್ಲಿ ಕನಿಷ್ಠ ಒಬ್ಬ ಮಹಿಳಾ ಸಚಿವೆಯನ್ನು ಸೇರಿಸುವ ಸಾಧ್ಯತೆಯೂ ಚರ್ಚೆಯಲ್ಲಿದೆ. ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಟಿ.ಬಿ. ಜಯಚಂದ್ರ, ಲಕ್ಷ್ಮಣ ಸವದಿ, ಕಾಶಪ್ಪನವರ್ ಸೇರಿದಂತೆ ಹಲವು ನಾಯಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಪ್ರಾದೇಶಿಕ ಸಮತೋಲನ ಕಾಪಾಡುವ ಉದ್ದೇಶದಿಂದ ವಿವಿಧ ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಬೇಕೆಂಬ ಒತ್ತಾಯವೂ ಕೇಳಿಬಂದಿದೆ.
ಒಟ್ಟಾರೆ ಮೊದಲ ಹಂತದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಜೊತೆ 13 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, ಒಂದೂವರೆ ತಿಂಗಳು ಕಳೆದರೂ ಸಚಿವ ಸಂಪುಟ ವಿಸ್ತರಣೆ ಆಗಿರಲಿಲ್ಲ.
ಖಾಲಿ ಇರುವ 20 ಸಚಿವ ಸ್ಥಾನಗಳಿಗೆ 50ಕ್ಕೂ ಹೆಚ್ಚು ಶಾಸಕರು ಮತ್ತು ನಾಯಕರು ಆಕಾಂಕ್ಷಿಗಳಾಗಿದ್ದು, ಅಂತಿಮ ನಿರ್ಧಾರಕ್ಕಾಗಿ ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಸಭೆಗಳು ಕುತೂಹಲ ಮೂಡಿಸಿವೆ.