ಮೈಸೂರು: ಮನೆ ಕೆಲಸದಾಕೆ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಈ ಬಗ್ಗೆ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರೇವಣ್ಣ, ನ್ಯಾಯಾಲಯದ ಬಗ್ಗೆ ನನಗೆ ನಂಬಿಕೆ ಇದೆ. ನಾನು ಯಾವುದೇ ವಿಷಯಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಕೆಲವು ಟಿವಿ ವಾಹಿನಿಗಳು ತಮ್ಮನ್ನು ಸಂಕಷ್ಟದಲ್ಲಿದ್ದಾರೆ ಎಂದು ಬಿಂಬಿಸುತ್ತಿವೆ. ಅದೆಲ್ಲ ನನಗೇನು ತೊಂದರೆಯಾಗಿಲ್ಲ. ಸಮಯ ಬಂದಾಗ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದು ತಿಳಿಸಿದರು.
ಇನ್ನು ಆಷಾಡ ಮಾಸದ ಮೊದಲ ಶುಕ್ರವಾರ ಹಿನ್ನೆಲೆಯಲ್ಲಿ ನಾಡ ಅದಿದೇವತೆ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದು, ರಾಜ್ಯದ ಎಲ್ಲಾ ಜನತೆಗೂ ತಾಯಿ ಚಾಮುಂಡೇಶ್ವರಿ ಒಳ್ಳೆಯದು ಮಾಡಲೆಂದು ಪ್ರಾರ್ಥಿಸಿದ್ದೇನೆ. ಒಳ್ಲೆಯ ಮಳೆ-ಬೆಳೆಯಾಗಿ ನಮ್ಮ ರೈತಾಪಿ ಜನರಿಗೆ ಸಮೃದ್ಧಿಯಾಗಲೆಂದು ಕೇಳಿರುವುದಾಗಿ ತಿಳಿಸಿದರು.