ಚೆನ್ನೈ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ತಮಿಳುನಾಡಿನ ಒಪ್ಪಿಗೆ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟ ಪಡಿಸಿರುವ ಬೆನ್ನಲ್ಲೇ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
ಜು.27ರಂದು ಸಂಸತ್ ಮುಂಗಾರು ಅಧಿವೇಶದ ವೇಳೆ ಸಂಸತ್ತಿನಲ್ಲಿ ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಅವರು ಈ ಬಗ್ಗೆ ಕೇಳಿದ ಪ್ರಶ್ನೆಗೆ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಲಿಖಿತ ಉತ್ತರ ನೀಡಿದ್ದು, ಗಡಿಯೊಳಗೆ ನೀರು ಬಳಕೆಗೆ ಕರ್ನಾಟಕಕ್ಕೆ ಪೂರ್ಣ ಅಧಿಕಾರ ಇದೆ. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಎಲ್ಲೂ ಒಪ್ಪಿಗೆ ಪಡೆಯಲು ಹೇಳಿಲ್ಲ ಎಂದು ಹೇಳಿದ್ದಾರೆ. ಮೇಕೆದಾಟು ಯೋಜನೆಗೆ ಕರ್ನಾಟಕವು ತಮಿಳುನಾಡು, ಕೇರಳ ಹಾಗೂ ಪುದುಚೇರಿಯಂತಹ ನೆರೆ ರಾಜ್ಯಗಳ ಪ್ರತ್ಯೇಕ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಕೇಂದ್ರ ಸರ್ಕಾರದ ತಕ್ಷಣದ ಹಸ್ತಕ್ಷೇಪಕ್ಕೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ತಕ್ಷಣವೇ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು. ಮೇಕೆದಾಟು ಯೋಜನೆಯಿಂದ ಕೆಳಭಾಗದ ರಾಜ್ಯದ ಹಕ್ಕುಗಳಿಗೆ ಧಕ್ಕೆಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕೆಳಭಾಗದ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ ಎಂಬ ಕೇಂದ್ರ ಜಲಶಕ್ತಿ ಸಚಿವಾಲಯದ ಹೇಳಿಕೆಯನ್ನು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಖಂಡಿಸಿದ್ದಾರೆ. ಆಲಮಟ್ಟಿ ಪ್ರಕರಣದಲ್ಲಿ ಉನ್ನತ ನ್ಯಾಯಾಲಯ ನೀಡಿದ್ದ ತೀರ್ಪನ್ನು ಉಲ್ಲೇಖಿಸಿರುವ ಅವರು, ಕೆಳಭಾಗದ ರಾಜ್ಯಗಳ (Lower Riparian States) ಸ್ಪಷ್ಟ ಸಮ್ಮತಿ ಇಲ್ಲದೆ ಯಾವುದೇ ಮೇಲ್ಭಾಗದ ರಾಜ್ಯವು ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳುವಂತಿಲ್ಲ ಎಂದು ವಾದಿಸಿದ್ದಾರೆ. ಕರ್ನಾಟಕದ ಈ ಪ್ರಸ್ತಾವನೆಯು ಕಾವೇರಿ ನೀರು ವಿವಾದ ನ್ಯಾಯಾಧಿಕರಣದ (CWDT) ಅಂತಿಮ ಆದೇಶ ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದೆ.
ಕಾವೇರಿ ತೀರ್ಪಿನ ನಿಯಮ 11 ಮತ್ತು 20ರ ಅಡಿಯಲ್ಲಿ ನದಿ ಜಲಾನಯನ ಪ್ರದೇಶದ ಸಹ-ರಾಜ್ಯಗಳ ಪರಸ್ಪರ ಸಮ್ಮತಿ ಕಡ್ಡಾಯವಾಗಿದೆ. ಮೇಕೆದಾಟು ಯೋಜನೆಯನ್ನು ಕೇವಲ ಒಂದು ಇಂಜಿನಿಯರಿಂಗ್ ಅಥವಾ ಕುಡಿಯುವ ನೀರಿನ ಯೋಜನೆಯಾಗಿ ನೋಡಬಾರದು. ಇದು ಲಕ್ಷಾಂತರ ರೈತರ ಜೀವನಾಧಾರವಾಗಿರುವ ಕಾವೇರಿ ಜಲ ಹಂಚಿಕೆಯ ಸೂಕ್ಷ್ಮ ವಿಷಯವಾಗಿದೆ.
2019ರಲ್ಲಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ವಿಸ್ತೃತ ಯೋಜನಾ ವರದಿಯನ್ನು (DPR) ಕೇಂದ್ರ ಜಲ ಆಯೋಗವು ನಿಯಮಗಳಿಗೆ ಬದ್ಧವಾಗಿರದ ಕಾರಣ ಪರಿಶೀಲನೆಗೆ ವಾಪಸ್ ಕಳುಹಿಸಿದ್ದನ್ನು ತಮಿಳುನಾಡು ಸಿಎಂ ಪತ್ರದಲ್ಲಿ ನೆನಪಿಸಿದ್ದಾರೆ. ಜೊತೆಗೆ, ಪಂಬಾರ್ ಜಲವಿದ್ಯುತ್ ಯೋಜನೆಯ ಹಳೆಯ ತೀರ್ಪಿನ ಉದಾಹರಣೆಯನ್ನು ನೀಡಿದ್ದು, ಯಾವುದೇ ಏಕಪಕ್ಷೀಯ ನಿರ್ಧಾರದಿಂದ ತಮಿಳುನಾಡಿನ ಕೃಷಿ ಹಾಗೂ ನೀರಾವರಿ ವ್ಯವಸ್ಥೆಗೆ ಭಾರಿ ಧಕ್ಕೆಯಾಗಲಿದೆ ಎಂದು ವಿಜಯ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಕಾವೇರಿ ನ್ಯಾಯಾಧಿಕರಣದ ಆದೇಶ ಹಾಗೂ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧವಾಗಿ ಕೆಳಪಾತ್ರದ ರಾಜ್ಯವಾದ ತಮಿಳುನಾಡಿನ ಹಕ್ಕುಗಳನ್ನು ರಕ್ಷಿಸಬೇಕು. ಕರ್ನಾಟಕ ಸಲ್ಲಿಸಿರುವ ಮೇಕೆದಾಟು ಯೋಜನೆಯ ಡಿಪಿಆರ್ ಪ್ರಸ್ತಾವನೆಗೆ ಅನುಮತಿ ನೀಡಬಾರದು ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಸಿಡಬ್ಲ್ಯುಸಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಪ್ರಧಾನಿ ಮೋದಿಯವರನ್ನು ಒತ್ತಾಯಿಸಿದ್ದಾರೆ.