ಬೆಂಗಳೂರು: ಕರ್ನಾಟಕಕ್ಕೆ ಮಾರಿ ತಮಿಳುನಾಡಿಗೆ ಉಪಕಾರಿ! ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಭೀಕರ ಬರಗಾಲದ ನಡುವೆಯೂ ಮತ್ತೊಮ್ಮೆ ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ನೀರು ಬಿಡಲು ಶರಣಾಗಿದೆ. ರಾಜ್ಯದ ಪರ ಸಮರ್ಥ ವಾದ ಮಂಡಿಸಲು ಸಿದ್ಧರಾಗಿ ಎಂದು ಎಷ್ಟು ಬಾರಿ ಎಚ್ಚರಿಸಿದರೂ ನಿರ್ಲಕ್ಷ್ಯ ಮಾಡುತ್ತಾ ಕಾಲಹರಣ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ನೀರಾವರಿ ಸಚಿವ ರಾಮಲಿಂಗಾರೆಡ್ಡಿ ಅವರು ಈಗ ಮತ್ತೊಮ್ಮೆ ಕಾವೇರಿಯ ಮಡಿಲನ್ನು ಬರಿದು ಮಾಡುವ ಮೂಲಕ ಕನ್ನಡಿಗರಿಗೆ ದ್ರೋಹ ಬಗೆಯಲು ಹೊರಟಿದ್ದಾರೆ.
ಕಾಂಗ್ರೆಸ್ ಸರ್ಕಾರ ಈ ಹಿಂದೆ ಮಾಡಿದ ತಪ್ಪಿನಿಂದ ಈಗಾಗಲೇ ಕರ್ನಾಟಕದ ಜಲಾಶಯಗಳು ಬರಿದಾಗಿದ್ದು ಕನ್ನಡಿಗರು ಹನಿ ನೀರಿಗೂ ಪರದಾಡುವ ದಯನೀಯ ಪರಿಸ್ಥಿತಿ ಇದೆ.
ಸಿಎಂ ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್ ಮುಲಾಜಿಗೆ ಬಿದ್ದು ತಮ್ಮ ಇಂಡಿಯಾ ಮೈತ್ರಿಕೂಟದ ಟಿವಿಕೆ ಸರ್ಕಾರವನ್ನು ಮೆಚ್ಚಿಸಲು ಮತ್ತೊಮ್ಮೆ ಕಾವೇರಿ ನೀರು ಬಿಟ್ಟರೆ ಜನ ಬೀದಿಗಿಳಿದು ಉಗ್ರ ಹೋರಾಟ ನಡೆಸುವುದು ಗ್ಯಾರೆಂಟಿ ಎಂದು ಎಚ್ಚರಿಕೆ ನೀಡಿದ್ದಾರೆ.
ಸರಿಯಾದ ಅಂಕಿ ಅಂಶ ಸಮೇತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯದ ವಸ್ತುಸ್ಥಿತಿ ಮನವರಿಕೆ ಮಾಡಿಕೊಟ್ಟು ಕನ್ನಡಿಗರ ಹಿತಾಸಕ್ತಿ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯ. ಸಿಎಂ ಡಿ.ಕೆ.ಶಿವಕುಮಾರ್ ಅವರು ಕೂಡಲೇ ಅಧಿಕಾರಿಗಳು ಹಾಗೂ ವಕೀಲರ ಸಭೆ ನಡೆಸಿ, ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸಿನ ವಿರುದ್ಧ ಮೇಲ್ಮನವಿ ಸಲ್ಲಿಸಿ ರಾಜ್ಯದ ಪರವಾಗಿ ಗಟ್ಟಿಯಾದ ವಾದ ಮಂಡಿಸಲು ಸಿದ್ಧತೆ ನಡೆಸಬೇಕು. ಈ ಹಿಂದೆ ಆದ ತಪ್ಪುಗಳು ಮರುಕಳಿಸದಂತೆ ಎಚ್ಚರ ವಹಿಸಿ ಯಾವುದೇ ಕಾರಣಕ್ಕೂ ಒಂದು ಹನಿ ಕಾವೇರಿ ನೀರು ರಾಜ್ಯದಿಂದ ಹೊರಹೋಗದಂತೆ ತಡೆಯಬೇಕು ಎಂದು ಆಗ್ರಹಿಸಿದ್ದಾರೆ.