ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ಅವರಿಂದ ನಾಗರಿಕ ಪೊಲೀಸ್ ಕಾನಸ್ಟೇಬಲ್ ಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು ಅಗಸ್ಟ್ 02, 2026 ರಂದು ಬೆಳಿಗ್ಗೆ 10:30 ಗಂಟೆಯಿಂದ 12 ಗಂಟೆಯವರೆಗೆ ಹುಬ್ಬಳ್ಳಿ-ಧಾರವಾಡ ನಗರ ಹಾಗೂ ಧಾರವಾಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ನಡೆಸಲಾಗುತ್ತದೆ. ಸದರಿ ನೇಮಕಾತಿ ಲಿಖಿತ ಪರೀಕ್ಷೆ ಕಾಲಕ್ಕೆ ನಿಷೇಧಿತ ವಸ್ತುಗಳು ಹಾಗೂ ವಸ್ತ್ರ ಸಂಹಿತೆ ಬಗ್ಗೆ ಪ್ರಾಧಿಕಾರವು ಪರೀಕ್ಷಾ ಅಭ್ಯರ್ಥಿಗಳಿಗೆ ಕೆಲವು ಸೂಚನೆಗಳನ್ನು ಹೊರಡಿಸಿದೆ.
ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ:
ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್ ಗಳನ್ನು ಅನುಮತಿಸಲಾಗುವುದಿಲ್ಲ, ಅರ್ಧ ತೋಳಿನ ಶರ್ಟ್ ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಸಾಧಾರಣ ಶರ್ಟ್, ಟಿ-ಶರ್ಟ್ ಧರಿಸಲು ಆದ್ಯತೆ ನೀಡಿದೆ. ಪ್ಯಾಂಟ್ ಮತ್ತು ಸರಳ ಫ್ಯಾಂಟ್(ಜೇಬುಗಳು ಇಲ್ಲದಿರುವ, ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಜಿಪ್ ಪಾಕೆಟ್ಗಳು, ಪಾಕೆಟ್ ಗಳು, ದೊಡ್ಡ ಬಟನ್ ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸಬೇಕು. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ:
ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಜ್ ಗಳು ಅಥವಾ ಬಟನ್ ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್ ಧರಿಸಬಾರದು, ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಧರಿಸಬೇಕು. ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ.(ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).
ನಿಷೇಧಿತ ವಸ್ತುಗಳ ಪಟ್ಟಿ:
ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಯಾವುದೇ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.
ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್ಗಳು, ಪೆನ್ ಡ್ರೈವ್ ಗಳು, ಇಯರ್ ಫೋನ್ ಗಳು, ಮೈಕ್ರೋಫೋನ್ ಗಳು, ಬ್ಲೂಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗೂ ತಿನ್ನುವುದನ್ನು ನಿಷೇಧಿಸಲಾಗಿದೆ. ಬಣ್ಣದ ಹಾಗೂ ಲೋಹದ ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ಗಳು ಮತ್ತು ಲಾಗ್ ಟೇಬಲ್ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸುವಂತಿಲ್ಲ. ಯಾವುದೇ ರೀತಿಯ ಮುಖ ಮುಚ್ಚುವಂತ ಮಾಸಕ್ ಅನ್ನು ಧರಿಸಬಾರದು.
ಸೂಚನೆ:
ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಕಡ್ಡಾಯಗೊಳಿಸಲಾಗಿದೆ. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ. ನಿಗದಿಪಡಿಸಲಾದ ವಸ್ತ್ರ ಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕಠಿಣ ಕ್ರಮವನ್ನು ಜರುಗಿಸಲಾಗುವುದು.
ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರಕೃಪೆ: ಎಐ