ಕೊಪ್ಪಳ: ಜಿಲ್ಲೆಯಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದ ಬಹುತೇಕ ಎಲ್ಲ ತಾಲ್ಲೂಕುಗಳಲ್ಲಿ ಶೇ.80 ರಷ್ಟು ಬೆಳೆ ಹಾನಿ ಸಂಭವಿಸಿದೆ. ಇದರಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ವಿಮಾ ಕಂಪನಿಗಳು ಶೇ.25 ರಷ್ಟು ಮಧ್ಯಂತರ ಬೆಳೆ ವಿಮೆ ಪರಿಹಾರವನ್ನು ನೀಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ವಿಮಾ ಕಂಪನಿಗಳಿಗೆ ಸೂಕ್ತ ನಿರ್ದೇಶನ ನೀಡಿ ಅಗತ್ಯ ಕ್ರಮ ವಹಿಸಬೇಕು ಎಂದು ಕೊಪ್ಪಳ ಜಿಲ್ಲೆಯ ಬರ ನಿರ್ವಹಣೆಯ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಸೂಚಿಸಿದರು.
ಗುರುವಾರದಂದು ಜಿಲ್ಲಾ ಪಂಚಾಯತ್ ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೊಪ್ಪಳ ಜಿಲ್ಲೆಯ ಬರ ಪರಿಸ್ಥಿತಿ, ಬೆಳೆ ಹಾನಿ ಸೇರಿದಂತೆ ಇತರೆ ವಿಷಯಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಎರಡು ದಿನಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಕುರಿತು ಖುದ್ದು ಪರಿಶೀಲನೆ ಮಾಡಿದ್ದೇನೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಬಹುತೇಕ ಶೇ.80 ಕ್ಕೂ ಹೆಚ್ಚು ಬೆಳೆ ಹಾನಿ ಸಂಭವಿಸಿದೆ. ಮುಂಗಾರು ಮಳೆ ಕೊರತೆಯಾಗಿದ್ದು, ಈಗಾಗಲೇ ಬಿತ್ತನೆ ಮಾಡಿದ ಬಹುತೇಕ ಬೆಳೆಗಳು ನಾಶವಾಗಿವೆ. ಇದರಿಂದ ರೈತ ಮಾಡಿದ ಖರ್ಚನ್ನು ಸಹ ಪಡೆಯಲಾರ. ಆದ್ದರಿಂದ ಈಗಾಗಲೇ ಬೆಳೆ ವಿಮೆಗೆ ನೋಂದಾಯಿಸಿದ ರೈತರಿಗೆ ಒಟ್ಟು ಬೆಳೆ ವಿಮೆಯ ಶೇ.25 ರಷ್ಟನ್ನು ಮಧ್ಯಂತರ ಪರಿಹಾರವಾಗಿ ವಿಮಾ ಕಂಪನಿಗಳು ನೀಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸಿ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮುಂಗಾರು ಮಳೆಯಾಧಾರಿತ ಬೆಳೆಗಳು ಹಾನಿಯಾದ ಹಿನ್ನೆಲೆಯಲ್ಲಿ ರೈತರಿಗೆ ಬದಲಾದ ಹವಾಮಾನಕ್ಕೆ ಅನುಗುಣವಾಗಿ ಬೆಳೆಯಬಹುದಾದ ಪರ್ಯಾಯ ಬೆಳೆಗಳ ಬಗ್ಗೆ ಅರಿವು ಮೂಡಿಸಿ. ಬೆಳೆ ವಿಮೆಗೆ ನೋಂದಣಿ ಮಾಡಲು ಅವಧಿ ವಿಸ್ತರಣೆಗೆ ಅವಕಾಶವಿದ್ದಲ್ಲಿ ಆ ಬಗ್ಗೆ ಕ್ರಮ ವಹಿಸಿ. ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಕಾರ್ಯ ನಿರ್ವಾಹಕ ಅಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು, ಪಿಡಿಒ ಗಳು, ಸೇರಿದಂತೆ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ವಿಮಾ ಕಂಪನಿಗಳು ಅನಗತ್ಯ ಕಾರಣಗಳನ್ನು ನೀಡಿ ವಿಮೆ ಪರಿಹಾರವನ್ನು ತಿರಸ್ಕರಿಸುವಂತಿಲ್ಲ ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳೆ ವಿಮೆಯಂತೆ ಕುಡಿಯುವ ನೀರು ಪೂರೈಕೆಗೂ ಅಧಿಕಾರಿಗಳು ಆದ್ಯತೆ ನೀಡಬೇಕು. ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ರೂ.1 ಕೋಟಿ ಅನುದಾನವನ್ನು ಕುಡಿಯುವ ನೀರಿನ ಪೂರೈಕೆಗಾಗಿ ನೀಡಲಾಗಿದೆ. ಹೊಸ ಬೋರ್ವೆಲ್ಗಳು, ಪೈಪ್ಲೈನ್ ಸಂಪರ್ಕ, ದುರಸ್ಥಿ, ಬಾಡಿಗೆ ಬೋರ್ವೆಲ್ ಪಡೆಯುವುದು ಮುಂತಾದ ಕುಡಿಯುವ ನೀರು ಪೂರೈಕೆಗೆ ಅನುಕೂಲವಾಗುವ ಯೋಜನೆಗಳಿಗೆ, ಕಾರ್ಯಗಳಿಗೆ ಅಧಿಕಾರಿಗಳು ಕ್ರಿಯಾ ಯೋಜನೆ ಸಿದ್ದಪಡಿಸಿ, ಸಂಬAಧಿಸಿದ ಶಾಸಕರ ಅನುಮೋದನೆ ಪಡೆಯಬೇಕು. ಬರ ಪರಿಸ್ಥಿತಿಯಿಂದ ಕುಡಿಯುವ ನೀರಿನ ಸಮಸ್ಯೆಯೂ ಮುಂದಿನ ದಿನಗಳಲ್ಲಿ ತೀವ್ರವಾಗುವ ಸಾಧ್ಯತೆ ಇರುವುದರಿಂದ ಸೂಕ್ತ ಯೋಜನೆ ರೂಪಿಸಿ, ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸಚಿವರು ತಿಳಿಸಿದರು.
ಮಳೆ ಕೊರತೆಯು ಕೇವಲ ರೈತರಿಗೆ ಮಾತ್ರವಲ್ಲ ಜಾನುವಾರುಗಳಿಗೂ ಸಂಕಷ್ಟ ತಂದಿದೆ. ಆದ್ದರಿಂದ ಜಿಲ್ಲೆಯಲ್ಲಿ ಮೇವು ಕೊರತೆಯಾಗದಂತೆ ಕ್ರಮ ವಹಿಸಬೇಕು. ಅಗತ್ಯವಿದ್ದಲ್ಲಿ ರೈತರಿಗೆ ಮೇವಿನ ಕಿಟ್, ಮೇವು ಬ್ಯಾಂಕ್ ಸ್ಥಾಪಿಸಬೇಕು. ಕೃಷಿ ಕೆಲಸವಿಲ್ಲದೆ ತೊಂದರೆ ಅನುಭವಿಸುತ್ತಿರುವ ರೈತರಿಗೆ, ಗ್ರಾಮೀಣರಿಗೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ನಾಳೆಯಿಂದಲೇ ಪ್ರತಿ ತಾಲ್ಲುಕಿನಲ್ಲೂ ಮಾನವ ದಿನಗಳನ್ನು ಸೃಜಿಸಿ ಉದ್ಯೋಗ ನೀಡಬೇಕು. ಸಮುದಾಯಿಕ ಹಾಗೂ ವೈಯಕ್ತಿಕ ಕಾಮಗಾರಿಗಳು, ಅಭಿವೃದ್ಧಿ ಕಾಮಗಾರಿಗಳಿಗೆ ಮಾನವ ದಿನಗಳನ್ನು ಸೃಜಿಸಿ ರೈತರಿಗೆ ಉದ್ಯೋಗ ಒದಗಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಕೇವಲ 5 ಗಂಟೆಗಳು ಮಾತ್ರ ವಿದ್ಯುತ್ ಪೂರೈಕೆ ಮಾಡುತ್ತಿರುವುದಾಗಿ ರೈತರು ದೂರು ನೀಡಿದ್ದು, ಜೆಸ್ಕಾಂ ನಿಂದ ಅಗತ್ಯವಿರುವ ಎಲ್ಲ ಕಡೆ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಸಂಬAಧಿಸಿದ ಇಲಾಖಾ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಮಾತನಾಡಿ, ಜಿಲ್ಲೆಯಲ್ಲಿ 2026 ರ ಜೂನ್ 1 ರಿಂದ ಆಗಸ್ಟ್ 4 ರವರೆಗೆ ವಾಡಿಕೆ ಮಳೆ 155.7 ಮಿ.ಮೀ. ಆಗಬೇಕಿತ್ತು. ಆದರೆ ಕೇವಲ 98.5 ಮಿ.ಮೀ. ಮಳೆಯಾಗಿದೆ. ಗಂಗಾವತಿ ಹಾಗೂ ಕಾರಟಗಿ ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಉಳಿದ ತಾಲ್ಲೂಕುಗಳಲ್ಲಿಯೂ ಮಳೆ ಕೊರತೆಯಾಗಿದೆ. ಬಿತ್ತನೆ ಗುರಿ 3,49,892 ಹೆಕ್ಟೆರ್ ಇದ್ದು, ಇದುವರೆಗೂ 2,41,995 ಹೆಕ್ಟೆರ್ ಮಾತ್ರ ಬಿತ್ತನೆಯಾಗಿದ್ದು, ಒಟ್ಟಾರೆ ಶೇ.69 ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಕಳೆದ ವರ್ಷ 3,74,000 ಹೆಕ್ಟೆರ್ ಬಿತ್ತನೆಯಾಗಿತ್ತು. ಜಿಲ್ಲೆಯಾದ್ಯಂತ ಒಟ್ಟು 1,90,667 ಹೆಕ್ಟೆರ್ ಬೆಳೆ ಹಾನಿಯಾಗಿದೆ. ಮುಂಗಾರು ಮಳೆ ಕೊರತೆಯಾದ್ದರಿಂದ ರೈತರು ಹಿಂಗಾರು ಬೆಳೆಗೆ ಸಿದ್ಧತೆ ನಡೆಸಿದ್ದಾರೆ. ಬದಲಾದ ಹವಾಮಾನಕ್ಕೆ ಅನುಗುಣವಾಗಿ ಪರ್ಯಾಯ ಬೆಳೆ ಬೆಳೆಯಲು ರೈತರಿಗೆ ತಿಳಿಸಲಾಗಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.
2026-27ನೇ ಸಾಲಿನ ಮುಂಗಾರು ಮಳೆ ಕೊರತೆಯಿಂದ ತಾಲ್ಲೂಕುವಾರು ಬೆಳೆ ಹಾನಿಯಲ್ಲಿ ಕೊಪ್ಪಳ 28,605 ಹೆ., ಕುಷ್ಟಗಿ 64,100 ಹೆ., ಯಲಬುರ್ಗಾ 43,145 ಹೆ., ಕುಕನೂರು 31,705 ಹೆ., ಗಂಗಾವತಿ 1,900 ಹೆ., ಕಾರಟಗಿ 530 ಹೆ., ಕನಕಗಿರಿ 20,680 ಹೆಕ್ಟೆರ್ ಸೇರಿದಂತೆ ಒಟ್ಟು 1,90,667 ಹೆಕ್ಟೆರ್ ಬೆಳೆಹಾನಿಯಾಗಿದೆ. ಜಿಲ್ಲೆಯಾದ್ಯಂತ 1,56,013 ಹೆಕ್ಟೆರ್ ವಿಸ್ತೀರ್ಣವನ್ನು ಬೆಳೆ ವಿಮೆಗೆ ನೋಂದಾಯಿಸಿದೆ. ರೈತರಿಗೆ ಬೆಳೆವಿಮೆಯಲ್ಲಿ ಮಧ್ಯಂತರ ಪರಿಹಾರ ನೀಡಲು ವಿಮಾ ಕಂಪನಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸಭೆಯಲ್ಲಿ ಸಚಿವರಿಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗು ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನರಾಜ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.