ಬೆಂಗಳೂರು: ಬಗರ್ ಹುಕುಂ ಜಮೀನು ಮಂಜೂರಾತಿಯಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದ ಬೇಲೂರು ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರು ಸುಮಾರು 52 ದಿನಗಳ ಜೈಲುವಾಸದ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ನ್ಯಾಯಾಲಯವು ಜಾಮೀನು ಮಂಜೂರು ಮಾಡಿದ್ದು, ಅಗತ್ಯ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಲಿಂಗೇಶ್ ಅವರು ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.
ಮಾಜಿ ಶಾಸಕರು ಜೈಲಿನಿಂದ ಹೊರಬರುತ್ತಿದ್ದಂತೆಯೇ ಹೊರಗಡೆ ನೆರೆದಿದ್ದ ನೂರಾರು ಜೆಡಿಎಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಹೂವಿನ ಹಾರ ಹಾಕಿ, ಹೆಗಲ ಮೇಲೆ ಹೊತ್ತುಕೊಂಡು ಜಯಘೋಷಗಳೊಂದಿಗೆ ಅತ್ಯಂತ ಅದ್ದೂರಿಯಾಗಿ ಸ್ವಾಗತಿಸಿದರು.
ಈ ವೇಳೆ ಮಾತನಾಡಿದ ಕೆ.ಎಸ್. ಲಿಂಗೇಶ್, ನಮ್ಮ ವೈರಿಗೂ ಸಹ ಇಂತಹ ಪರಿಸ್ಥಿತಿ ಬರಬಾರದು. ನಾನು ಮಾಡದಿರುವ ತಪ್ಪಿಗೆ 52 ದಿನಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದೇನೆ. 1988ರಲ್ಲಿ ಅರ್ಜಿ ಸಲ್ಲಿಸಿದ್ದ ಅರ್ಹ ಫಲಾನುಭವಿಗಳಿಗೆ ನಾವು ಭೂಮಿ ಮಂಜೂರು ಮಾಡಿದ್ದೇವೇ ಹೊರತು ಯಾವುದೇ ಅಕ್ರಮ ಎಸಗಿಲ್ಲ ಎಂದರು.
ನಾನಾಗಲಿ ಅಥವಾ ಬೇಲೂರಿನ ಮಾಜಿ ಶಾಸಕರಾಗಿದ್ದ ದಿವಂಗತ ರುದ್ರೇಶ್ಗೌಡ ಅವರಾಗಲಿ ಯಾವುದೇ ತಪ್ಪು ಮಾಡಿಲ್ಲ. ಕಾನೂನುಬದ್ಧವಾಗಿಯೇ ಕೆಲಸ ಮಾಡಿದ್ದೇವೆ. ತಮ್ಮ ಮೇಲಿರುವ ಎಲ್ಲಾ ಆರೋಪಗಳಿಂದ ಸಂಪೂರ್ಣವಾಗಿ ಮುಕ್ತರಾಗಿ ಹೊರಬರುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.