ಬೆಂಗಳೂರು : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಗೋಕಾಕ್ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ನಡೆಸಿರುವ ಶೋಧ ಕಾರ್ಯಾಚರಣೆಯು ಹೊಸ ತಿರುವು ಪಡೆದುಕೊಂಡಿದ್ದು, ಸಚಿವರ ಬಾಮೈದ ಹಾಗೂ ಅಬಕಾರಿ ಇಲಾಖೆಯ ಮಾಜಿ ಅಧಿಕಾರಿ ವೈ. ಮಂಜುನಾಥ್ ಪ್ರಕರಣಕ್ಕೂ ಈ ದಾಳಿಗೂ ಯಾವುದೇ ಸಂಬಂಧವಿಲ್ಲ ಎಂದು ಇಡಿ ಸ್ಪಷ್ಟಪಡಿಸಿದೆ. ಆರಂಭದಲ್ಲಿ ಮಂಜುನಾಥ್ ಪ್ರಕರಣದ ಮುಂದುವರಿದ ಭಾಗವಾಗಿ ಈ ದಾಳಿ ನಡೆದಿದೆ ಎಂದು ವರದಿಯಾಗಿತ್ತಾದರೂ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ)-1999ರ ಅಡಿಯಲ್ಲಿ ಈ ಪ್ರತ್ಯೇಕ ಶೋಧ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ ಎಂದು ಇಡಿ ತಿಳಿಸಿದೆ.
ದಕ್ಷಿಣ ಆಫ್ರಿಕಾ ಮತ್ತು ಉಗಾಂಡ ಸೇರಿದಂತೆ ವಿವಿಧ ವಿದೇಶಗಳಲ್ಲಿ ನಡೆದಿರುವ ಅಕ್ರಮ ಹೂಡಿಕೆಗಳು ಹಾಗೂ ಹಣಕಾಸು ವಹಿವಾಟುಗಳ ಆರೋಪದ ಹಿನ್ನೆಲೆಯಲ್ಲಿ ಈ ತನಿಖೆ ನಡೆಯುತ್ತಿದ್ದು, ಸಚಿವ ಸತೀಶ್ ಜಾರಕಿಹೊಳಿ ಅವರ ಕಡೆಯಿಂದ ಆ ದೇಶಗಳಲ್ಲಿ ಹಣ ಅಥವಾ ಹೂಡಿಕೆ ಮಾಡಲಾಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋರಿಯಲ್ಲಿರುವ ಸಚಿವರ ನಿವಾಸ ಹಾಗೂ ಅವರ ಆಪ್ತರ ಮನೆಗಳಲ್ಲಿ ವಿದೇಶಿ ಹೂಡಿಕೆ, ಹಣ ವರ್ಗಾವಣೆ ಮತ್ತು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಶೋಧಿಸಲಾಗುತ್ತಿದ್ದು, ಇದರೊಂದಿಗೆ ಬೆಳಗಾವಿ ನಗರದ ಲಕ್ಷ್ಮೀ ಟೆಕ್ ಪ್ರದೇಶದಲ್ಲಿರುವ ಸಚಿವರ ಆಪ್ತ ಹಾಗೂ ವೈದ್ಯ ಡಾ. ಗಿರೀಶ್ ಸೋನ್ವಾಲ್ಕರ್ ಸೇರಿದಂತೆ ಮೂವರು ಆಪ್ತರ ನಿವಾಸಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ತನಿಖೆ ಮುಂದುವರಿಸಿದ್ದಾರೆ