ಬೆಂಗಳೂರು: ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಈ ಕಾರ್ಯಚರಣೆಯ ಹಿಂದಿನ ಪ್ರಮುಖ ಕಾರಣಗಳು ಈಗ ಬಹಿರಂಗಗೊಂಡಿವೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ನಿಯಮಗಳನ್ನು ಗಾಳಿಗೆ ತೂರಿ ವಿದೇಶಗಳಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಣ ಹೂಡಿಕೆ ಮಾಡಿರುವ ಗಂಭೀರ ಆರೋಪ ಸಚಿವರ ಮೇಲಿದೆ. ತನಿಖೆಯ ವೇಳೆ ಸತೀಶ್ ಜಾರಕಿಹೊಳಿ ಅವರು ಆಫ್ರಿಕಾದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ಉದ್ಯಮದಲ್ಲಿ ಭಾರಿ ಪ್ರಮಾಣದ ಹಣವನ್ನು ಹೂಡಿಕೆ ಮಾಡಿರುವುದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಅಕ್ರಮ ಹಣಕಾಸು ಜಾಲದ ತನಿಖೆ ಮುಂದುವರಿದಂತೆ ಆಫ್ರಿಕಾದ ಗಣಿಗಾರಿಕೆ ಕಂಪನಿಯಲ್ಲಿ ಅವರ ಕುಟುಂಬಸ್ಥರೇ ಪ್ರಮುಖ ಹುದ್ದೆಗಳಲ್ಲಿದ್ದಾರೆ ಎಂಬ ಕುತೂಹಲಕಾರಿ ಮಾಹಿತಿ ಹೊರಬಿದ್ದಿದೆ. ಸಚಿವರ ಪುತ್ರ ರಾಹುಲ್ ಜಾರಕಿಹೊಳಿ ಹಾಗೂ ಅವರ ಸಹೋದರಿ ಲಕ್ಷ್ಮಿ ಈ ವಿದೇಶಿ ಗಣಿಗಾರಿಕೆ ಸಂಸ್ಥೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಕ್ರಮ ಮಾರ್ಗಗಳ ಮೂಲಕ ವಿದೇಶಕ್ಕೆ ಕೋಟ್ಯಂತರ ರೂಪಾಯಿ ನಿಧಿ ವರ್ಗಾವಣೆ ಮಾಡಿ, ಕುಟುಂಬದವರ ಹೆಸರಿನಲ್ಲಿ ಕಂಪನಿಗಳನ್ನು ಸ್ಥಾಪಿಸಿರುವ ಕುರಿತು ಇಡಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಸ್ತುತ ಈ ದಾಖಲೆಗಳ ಸಂಪೂರ್ಣ ಪರಿಶೀಲನೆ ನಡೆಯುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕ ಇಡಿ ನೀಡುವ ಅಧಿಕೃತ ಮಾಹಿತಿಯಿಂದ ಈ ಅಕ್ರಮ ಹೂಡಿಕೆಯ ಸಂಪೂರ್ಣ ಜಾಲ ಹೊರಬೀಳಲಿದೆ.