ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಪ್ರೋತ್ಸಾಹಧನ ಪಡೆಯುತ್ತಿರುವ ಅರ್ಹ ರೈತರು ಪ್ರತಿ ವರ್ಷ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ 01-02-2019 ರ ಪೂರ್ವದಲ್ಲಿ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತ ಕುಟುಂಬಕ್ಕೆ ವರ್ಷಕ್ಕೆ ಒಟ್ಟು ರೂ. 6,000 ರೂ.ಗಳನ್ನು ಪ್ರತಿ 4 ತಿಂಗಳಿಗೊಮ್ಮೆ ರೂ. 2,000 ರೂ.ಗಳಂತೆ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಈ ಪ್ರೋತ್ಸಾಹಧನವನ್ನು ಮುಂದುವರಿಸಲು ಫ್ರೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆಯಂತೆ ಕೇಂದ್ರ ಸರ್ಕಾರವು ಅಗ್ರಿಸ್ಟ್ಯಾಕ್ ಯೋಜನೆಯಡಿ ಗುರುತಿನ ಸಂಖ್ಯೆಯನ್ನು ಸೃಷ್ಟಿಸುವುದು ಕಡ್ಡಾಯವಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತ ಪಿ.ಎಂ.ಕಿಸಾನ್ ಯೋಜನೆಯಡಿ ಒಟ್ಟು 1,36,616 ಫಲಾನುಭವಿಗಳಿದ್ದಾರೆ. ತಾಲ್ಲೂಕುವಾರು ವಿವರ ಹೀಗಿದೆ: ಶಿವಮೊಗ್ಗ-18,065, ಭದ್ರಾವತಿ-18,920, ತೀರ್ಥಹಳ್ಳಿ-16,216, ಸಾಗರ-19,916, ಹೊಸನಗರ-12,634, ಶಿಕಾರಿಪುರ-25,196 ಹಾಗೂ ಸೊರಬ-25,669. ಈ ಪೈಕಿ ಇ-ಕೆವೈಸಿ ಬಾಕಿ ಇರುವ ರೈತರು ಕೂಡಲೇ ಅದನ್ನು ಪೂರ್ಣಗೊಳಿಸಬೇಕಾಗಿದೆ.
ಇ-ಕೆವೈಸಿ ಮಾಡಿಸುವ ವಿಧಾನ:
ರೈತರು ಎರಡು ವಿಧಾನಗಳ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬಹುದು:
ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಿಗೆ (ಸಿಎಸ್ ಸಿ) ಭೇಟಿ ನೀಡಿ ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಮಾಡಿಸಬಹುದು.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 'PMKISAN e-KYC through FaceRecognition App' ಮೂಲಕ ಮುಖ (ಫೇಸ್) ದೃಢೀಕರಣದ ಆಧಾರದ ಮೇಲೆಯೂ ರೈತ ಸಂಪರ್ಕ ಕೇಂದ್ರಗಳಲ್ಲಿ ಇ-ಕೆವೈಸಿ ಮಾಡಿಕೊಳ್ಳಬಹುದು.
ಆದ್ದರಿಂದ ಜಿಲ್ಲೆಯ ಫಲಾನುಭವಿ ರೈತರು ತಮ್ಮ ಆಧಾರ್ ಕಾರ್ಡ್ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಬಾಕಿ ಇರುವ ಇ-ಕೆವೈಸಿಯನ್ನು ತಕ್ಷಣವೇ ಪೂರ್ಣಗೊಳಿಸಿಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ.