ಗೌರಿ-ಗಣೇಶ ಹಬ್ಬದ ಆಚರಣೆ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ, ಕಾನೂನು-ಸುವ್ಯವಸ್ಥೆ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬಳ್ಳಾರಿ ಜಿಲ್ಲೆಯಾದ್ಯಂತ ಡಿಜೆ ಮತ್ತು ಹೈ-ಬೇಸ್ ಸೌಂಡ್ ಸಿಸ್ಟಂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕೆ. ನಾಗೇಂದ್ರ ಪ್ರಸಾದ್ ಅವರು ಆದೇಶ ಹೊರಡಿಸಿದ್ದಾರೆ.
‘ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023' ರ ಕಲಂ 152 ಮತ್ತು 163 ರ ಅಡಿಯಲ್ಲಿ ತಮಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ. ಈ ನಿಷೇಧಾಜ್ಞೆಯು ಸೆ.14 ರಿಂದ ಶ್ರೀ ಗೌರಿ-ಗಣೇಶ ಹಬ್ಬ ಮುಕ್ತಾಯವಾಗುವವರೆಗೆ ಜಿಲ್ಲೆಯಾದ್ಯಂತ ಜಾರಿಯಲ್ಲಿರಲಿದೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಶೇಷವಾಗಿ ವಿಸರ್ಜನಾ ಮೆರವಣಿಗೆಗಳಲ್ಲಿ ಅತಿಯಾದ ಶಬ್ದ ಉಂಟುಮಾಡುವ ಡಿಜೆ ಬಾಕ್ಸ್ಗಳಿಂದ ಉಂಟಾಗುವ ನಿರಂತರ ಶಬ್ದ ಮಾಲಿನ್ಯವು ವಯೋವೃದ್ಧರು, ಚಿಕ್ಕ ಮಕ್ಕಳು, ಬಾಣಂತಿಯರು ಹಾಗೂ ಹೃದಯ ಸಂಬAಧಿ ಕಾಯಿಲೆಗಳಿಂದ ಬಳಲುತ್ತಿರುವವರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ ವರದಿಯ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಡಿಜೆ ಸೌಂಡ್ ಸಿಸ್ಟಂ, ಹೈ-ಬೇಸ್ ಸಿಸ್ಟಂ, ಡಿಜೆ ಬಾಕ್ಸ್ಗಳು ಹಾಗೂ ಹೆಚ್ಚಿನ ಶಬ್ದ ಉಂಟುಮಾಡುವ ಯಾವುದೇ ಧ್ವನಿವರ್ಧಕ ಉಪಕರಣಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.