ಸಾಗರ: ಕನ್ನಡ ರಂಗಭೂಮಿಯ ದಿಗ್ಗಜ, ಖ್ಯಾತ ರಂಗಕರ್ಮಿ ಚಿದಂಬರರಾವ್ ಜಂಬೆ ಅವರ ನಿಧನಕ್ಕೆ ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಭಾವಪೂರ್ಣ ನಮನ ಸಲ್ಲಿಸಿದ ಅವರು, ಶೋಕತಪ್ತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಜಂಬೆ ಅವರ ಅಗಲಿಕೆಯಿಂದ ಕನ್ನಡ ಸಾಂಸ್ಕೃತಿಕ ಕ್ಷೇತ್ರ ಹಾಗೂ ರಂಗಭೂಮಿಗೆ ತುಂಬಲಾರದ ನಷ್ಟವಾಗಿದೆ ಎಂದು ಶಾಸಕರು ಸ್ಮರಿಸಿದರು.
ರಂಗಭೂಮಿಯ ಬೆಳವಣಿಗೆಗೆ ಅಪಾರ ಸೇವೆ
ರಂಗಕರ್ಮಿ ಚಿದಂಬರರಾವ್ ಜಂಬೆ ಪಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಡ್ಡೇರಿ ಗ್ರಾಮದವರಾದ ಚಿದಂಬರರಾವ್ ಜಂಬೆ ಅವರು ರಂಗಭೂಮಿ ಹಾಗೂ ನಟನಾ ತರಬೇತಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಮೈಸೂರಿನ ರಂಗಾಯಣದ ನಿರ್ದೇಶಕರಾಗಿ, ಬೆಂಗಳೂರಿನ ರಾಷ್ಟ್ರೀಯ ನಾಟಕ ಶಾಲೆಯ (NSD) ಕೇಂದ್ರದ ಮುಖ್ಯಸ್ಥರಾಗಿ ಹಾಗೂ ಸಾಣೆಹಳ್ಳಿಯ ರಂಗ ತರಬೇತಿ ಶಾಲೆಯ ಪ್ರಾಂಶುಪಾಲರಾಗಿ ಅವರು ಮೌಲಿಕ ಸೇವೆ ಸಲ್ಲಿಸಿದ್ದರು. ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲೂ ಹಲವು ಮಹತ್ವದ ನಾಟಕಗಳನ್ನು ನಿರ್ದೇಶಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದರು ಎಂದು ನೆನಪಿಸಿಕೊಂಡರು.
ಪ್ರಶಸ್ತಿ ಪುರಸ್ಕಾರಗಳ ಹಿರಿಮೆ
ರಂಗಭೂಮಿಗೆ ನೀಡಿದ ಸಮಗ್ರ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಹಾಗೂ ಪ್ರತಿಷ್ಠಿತ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಮುಖ ಗೌರವಗಳು ಸಂದಿವೆ. ಅಪಾರ ಶಿಷ್ಯಬಳಗ, ಕಲಾವಿದರು ಹಾಗೂ ರಂಗಾಭಿಮಾನಿಗಳನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂಬುದಾಗಿ ತಿಳಿಸಿದರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು