ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಏಕದಿನ ಮತ್ತು ಟಿ20 ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಏಕದಿನ ತಂಡಕ್ಕೆ ಶುಭಮನ್ ಗಿಲ್ ನಾಯಕನಾಗಿದ್ದು, ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮತ್ತೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇಂಗ್ಲೆಂಡ್ ಪ್ರವಾಸದ ಬಳಿಕ ರೋಹಿತ್ ಮತ್ತು ಕೊಹ್ಲಿ ಏಕದಿನ ಕ್ರಿಕೆಟ್ನಿಂದ ದೂರ ಉಳಿದಿದ್ದರು. ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಮೂಲಕ ಇಬ್ಬರೂ ಮತ್ತೆ ತಂಡಕ್ಕೆ ಮರಳಿದ್ದಾರೆ.
ಏಕದಿನ ತಂಡದಲ್ಲಿ ರುತುರಾಜ್ ಗೈಕ್ವಾಡ್, ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಧ್ರುವ್ ಜುರೆಲ್, ನಿತೀಶ್ ಕುಮಾರ್ ರೆಡ್ಡಿ ಮತ್ತು ರವೀಂದ್ರ ಜಡೇಜಾ ಸೇರಿದಂತೆ ಹಲವು ಆಟಗಾರರಿಗೆ ಅವಕಾಶ ನೀಡಲಾಗಿದೆ.
ಕೆ.ಎಲ್. ರಾಹುಲ್ ಮತ್ತು ಪ್ರಸಿಧ್ ಕೃಷ್ಣ ಇಬ್ಬರು ಕನ್ನಡಿಗರು ಏಕದಿನ ತಂಡದಲ್ಲಿದ್ದಾರೆ. ರಾಹುಲ್ ವಿಕೆಟ್ಕೀಪರ್-ಬ್ಯಾಟರ್ ಆಗಿ ತಂಡದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್ ಜತೆಗೆ ಪ್ರಸಿಧ್ ಕೃಷ್ಣ ಕೂಡ ಅವಕಾಶ ಪಡೆಯುವ ಸಾಧ್ಯತೆಯಿದೆ.
https://x.com/BCCI/status/2100239440493052226
ಇದೇ ವೇಳೆ ನಮನ್ ಧೀರ್ ಮತ್ತು ಔಕಿಬ್ ನಬಿ ಮೊದಲ ಬಾರಿಗೆ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಟಿ20 ತಂಡಕ್ಕೆ ಶ್ರೇಯಸ್ ಅಯ್ಯರ್ ನಾಯಕ
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಶ್ರೇಯಸ್ ಅಯ್ಯರ್ ನಾಯಕನಾಗಿದ್ದು, ತಿಲಕ್ ವರ್ಮಾ ಉಪನಾಯಕನಾಗಿದ್ದಾರೆ. ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಮತ್ತು ಅರ್ಷದೀಪ್ ಸಿಂಗ್ ತಂಡದಲ್ಲಿದ್ದಾರೆ.
ಭಾರತದ ಟಿ20 ತಂಡ:
ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ (ಉಪನಾಯಕ), ಶಿವಂ ದುಬೆ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್ ಮತ್ತು ಮಯಾಂಕ್ ಯಾದವ್.
ಸೆಪ್ಟೆಂಬರ್ 27ರಿಂದ ಏಕದಿನ ಸರಣಿ
ವೆಸ್ಟ್ ಇಂಡೀಸ್ ವಿರುದ್ಧದ ಮೂರು ಏಕದಿನ ಪಂದ್ಯಗಳು ಸೆಪ್ಟೆಂಬರ್ 27, ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 3ರಂದು ನಡೆಯಲಿವೆ. ಮೊದಲ ಪಂದ್ಯ ತಿರುವನಂತಪುರಂನಲ್ಲಿ, ಎರಡನೇ ಪಂದ್ಯ ಗುವಾಹಟಿಯಲ್ಲಿ ಮತ್ತು ಮೂರನೇ ಪಂದ್ಯ ಚಂಡೀಗಢದಲ್ಲಿ ನಡೆಯಲಿದೆ.
ಇದಾದ ಬಳಿಕ ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಅಕ್ಟೋಬರ್ 6ರಂದು ಲಖನೌ, 9ರಂದು ರಾಂಚಿ, 11ರಂದು ಇಂದೋರ್, 14ರಂದು ಹೈದರಾಬಾದ್ ಹಾಗೂ 17ರಂದು ಬೆಂಗಳೂರಿನಲ್ಲಿ ಟಿ20 ಪಂದ್ಯಗಳು ನಡೆಯಲಿವೆ.
ಇನ್ನು ಸೀಮಿತ ಓವರ್ಗಳ ತಂಡದಲ್ಲಿ ಸ್ಥಾನ ಪಡೆಯದ ರಿಷಭ್ ಪಂತ್ ಅವರು ಇರಾನಿ ಕಪ್ನಲ್ಲಿ ರೆಸ್ಟ್ ಆಫ್ ಇಂಡಿಯಾ ತಂಡವನ್ನು ಮುನ್ನಡೆಸಲಿದ್ದಾರೆ.
ಸೈಡ್ ಸ್ಟ್ರೈನ್ ಸಮಸ್ಯೆಯಿಂದ ವರುಣ್ ಚಕ್ರವರ್ತಿ ಏಷ್ಯನ್ ಗೇಮ್ಸ್ ಹಾಗೂ ಜಪಾನ್ ವಿರುದ್ಧದ ಟಿ20 ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ವಿಪ್ರಜ್ ನಿಗಮ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ.