ಶಿವಮೊಗ್ಗ: ಮಲೆನಾಡು ಭಾಗದ ಜನರ ನಿದ್ದೆಗೆಡಿಸಿರುವ ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಅಂಗೀಕರಿಸುವುದಿಲ್ಲ; ಜನರ ಪರವಾಗಿ ನಿಂತು ಅವರ ಹಿತರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಸಿಎಂ ಡಿ.ಕೆ ಶಿವಕುಮಾರ್ ಅವರ ಸಾರ್ವಜನಿಕರ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಸ್ತೂರಿ ರಂಗನ್ ವರದಿಗೆ ಧಿಕ್ಕಾರ
ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಹಾಗೂ ಕಸ್ತೂರಿ ರಂಗನ್ ವರದಿಯಿಂದಾಗಿ ಮಲೆನಾಡು ಭಾಗದ ಜನರು ತೀವ್ರ ಆತಂಕದಲ್ಲಿದ್ದಾರೆ. ಹಿಂದೆ ಕಾವೇರಿ ನೀರಿನ ವಿಚಾರ ಬಂದಾಗ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರು ವಿಶೇಷ ಅಧಿವೇಶನ ಕರೆದು ದಿಟ್ಟ ನಿಲುವು ತೆಗೆದುಕೊಂಡಿದ್ದನ್ನು ಸ್ಮರಿಸಿದ ಅವರು, ಅದೇ ಹಾದಿಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ಸರ್ಕಾರ ಸಂಪೂರ್ಣವಾಗಿ ಧಿಕ್ಕರಿಸಲಿದೆ ಎಂದರು.
ಈ ಸಮಸ್ಯೆಯನ್ನು ಕೇವಲ ಸಭಾಂಗಣದಲ್ಲಿ ಚರ್ಚಿಸದೆ ಜನರ ಮನೆಬಾಗಿಲಿಗೆ ಬಂದು ಆಲಿಸುತ್ತಿರುವ ಸರ್ಕಾರದ ನಡೆ ಶ್ಲಾಘನೀಯ ಎಂದು ಹೇಳಿದರು.
ಅರಣ್ಯವಾಸಿಗಳು ಹಾಗೂ ಅಡಿಕೆ ಬೆಳೆಗಾರರ ರಕ್ಷಣೆ
ಮಲೆನಾಡಿನಲ್ಲಿ ಪರಿಸರ ಉಳಿದಿರುವುದೇ ರೈತರಿಂದ, ಹೀಗಾಗಿ ಅರಣ್ಯವಾಸಿಗಳಿಗೆ ತೊಂದರೆ ನೀಡುವ ನೀತಿಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದರು.
1990ರಲ್ಲಿ ಬಂಗಾರಪ್ಪನವರ ಸರ್ಕಾರ ಉಚಿತ ವಿದ್ಯುತ್ ನೀಡಿದ ಬಳಿಕ ಜಿಲ್ಲೆಯಲ್ಲಿ ಅಡಿಕೆ ಬೆಳೆ ಗಣನೀಯವಾಗಿ ವಿಸ್ತರಿಸಿದ್ದು, ಇಂದು ಸುಮಾರು 1.48 ಲಕ್ಷ ರೈತರು ಅಡಿಕೆ ಕೃಷಿಯನ್ನು ಅವಲಂಬಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ಜಿಲ್ಲೆ ಇದಾಗಿದ್ದು, ಕೇಂದ್ರ ಸರ್ಕಾರ ಇಲ್ಲಿನ ಜನರ ವಾಸ್ತವ ಸಂಕಷ್ಟವನ್ನು ಅರ್ಥಮಾಡಿಕೊಂಡು ಸೂಕ್ತ ನೆರವು ನೀಡಬೇಕು ಎಂದು ಆಗ್ರಹಿಸಿದರು.
ಭೂಕುಸಿತ ಸಂತ್ರಸ್ತರಿಗೆ ನಿವೇಶನ ಮತ್ತು ನೆರವು
ಇತ್ತೀಚೆಗೆ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ಈಗಾಗಲೇ ಸರ್ಕಾರದಿಂದ ಪರಿಹಾರ ವಿತರಿಸಲಾಗಿದೆ. ಸಂತ್ರಸ್ತ ಕುಟುಂಬಗಳಿಗೆ ಶೀಘ್ರವೇ ನಿವೇಶನ ಒದಗಿಸಲು ಜಿಲ್ಲಾಡಳಿತದ ಮೂಲಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅಲ್ಲದೆ, ಪಕ್ಷಾತೀತವಾಗಿ ಮುಖಂಡರೆಲ್ಲರೂ ಸಂತ್ರಸ್ತರಿಗೆ ವೈಯಕ್ತಿಕವಾಗಿಯೂ ಬೆಂಬಲವಾಗಿ ನಿಲ್ಲಲಿದ್ದಾರೆ ಎಂದು ತಿಳಿಸಿದರು.
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಗೆ ಕೃತಜ್ಞತೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಮಲೆನಾಡು ಭಾಗದ ಜನರ ಸಂಕಷ್ಟಗಳನ್ನು ಆಲಿಸಲು ನೇರವಾಗಿ ಆಗಮಿಸಿರುವುದಕ್ಕೆ ಸಚಿವರು ಜಿಲ್ಲೆಯ ಜನರ ಪರವಾಗಿ ಕೃತಜ್ಞತೆ ಸಲ್ಲಿಸಿದರು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನಸಾಮಾನ್ಯರ ಜೊತೆ ನಿಂತು ಕೆಲಸ ಮಾಡಲು ಈ ನಡೆ ಸ್ಫೂರ್ತಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..