ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜುಲೈ 1ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ಕೆಲವೆಡೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ನದಿಗಳು ಮತ್ತು ಹಳ್ಳ-ಕೊಳ್ಳಗಳ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ಕೊಡಗು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಇದೇ ವೇಳೆ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಸಾಧಾರಣದಿಂದ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದ್ದು, ಸಾರ್ವಜನಿಕರು ಅಗತ್ಯವಿದ್ದರೆ ಮಾತ್ರ ಹೊರಗೆ ಸಂಚರಿಸುವಂತೆ, ಪ್ರವಾಹಪೀಡಿತ ಮತ್ತು ಗುಡ್ಡಕುಸಿತ ಸಂಭವಿಸಬಹುದಾದ ಪ್ರದೇಶಗಳಲ್ಲಿ ವಿಶೇಷ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆ ಸಲಹೆ ನೀಡಿವೆ.