ಬೀದರ್ : ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದಲ್ಲಿ ಭಾರೀ ಮಳೆಯ ಕಾರಣದಿಂದ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ.
ಮೃತ ಬಾಲಕನನ್ನು ಅಲಿ ಮೊಮಿನ್ ಎಂದು ಗುರುತಿಸಲಾಗಿದೆ.ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ವಿದ್ಯುತ್ ಕಂಬದಿಂದ ಮನೆಗೆ ಸಂಪರ್ಕ ಕಲ್ಪಿಸಿದ್ದ ವೈರ್ ತುಂಡಾಗಿ ನೆಲಕ್ಕೆ ಬಿದ್ದಿತ್ತು.ಆಟವಾಡುತ್ತಿದ್ದ ಬಾಲಕ ಅರಿವಿಲ್ಲದೆ ಆ ವೈರ್ ಅನ್ನು ಮುಟ್ಟಿದ್ದರಿಂದ, ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.
ಈ ಘಟನೆಯು ಹುಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಜೆಸ್ಕಾಂ (GESCOM) ಅಧಿಕಾರಿಗಳ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣವೆಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.